2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮಗೆ ಮುಖ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Letest Post ರಾಜ್ಯ
  • ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಸಚಿವರು

ಬೆಂಗಳೂರು: ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು.

ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಳಗ್ಗೆ ಮುಖ್ಯಮಂತ್ರಿಗಳಿಗೆ ಆಮಂತ್ರಣ ನೀಡಿ ಬಂದೆ, ಈಗ ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದೇನೆ. ಹಾಗಾಗಿ ಬೇರೆ ವಿಷಯಗಳ ಬಗ್ಗೆ ನಾನೇನು ಮಾತನಾಡಲಾರೆ ಎಂದರು.

ರಾಜಕೀಯ ಬೆಳವಣಿಗೆಗಳ ಕುರಿತು ಉಪ ಮುಖ್ಯಮಂತ್ರಿಗಳ ಹೇಳಿಕೆ ಕುರಿತಂತೆ ಮಾಧ್ಯಮದವರು ಪ್ರಶ್ನಿಸಿದಾಗ, ಅವೆಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ನಮ್ಮೆಲ್ಲರ ಉದ್ದೇಶ ಒಂದೇ, ಅದು 2028ರ ಚುನಾವಣೆಯಲ್ಲಿ ಪುನಃ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಕೆಲಸ ಮಾಡುವುದು ಎಂದು ಸಚಿವರು ತಿಳಿಸಿದರು.

ಇದೇ ಶುಕ್ರವಾರ ಅರಮನೆ ಮೈದಾನದಲ್ಲಿ ನಡೆಯುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಉದ್ಘಾಟನೆ, ಅಕ್ಕಪಡೆಗೆ ಚಾಲನೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಆರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದ್ದು, ಅವರ ಆಗಮನದ ಕುರಿತು ಇನ್ನಷ್ಟೇ ಖಚಿತವಾಗಬೇಕಿದೆ ಎಂದರು.

Leave a Reply

Your email address will not be published. Required fields are marked *